ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರಿಗೆ ಚಿತ್ರರಂಗ ಮತ್ತು ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಇನ್ನು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ನಟಿ ರಾಗಿಣಿ ದ್ವಿವೇದಿ, `ಸರ್ಕಾರಿ ನ್ಯಾಯಬೆಲೆ ಅಂಗಡಿ`ಯಲ್ಲಿ ಪಡಿತರ ಚೀಟಿದಾರರಿಗೆ ದಿನಸಿ ವಿತರಿಸುವ ಮೂಲಕ ಗಮನ ಸೆಳೆದಿದ್ದಾರೆ.
ಹೌದು, ನಟಿ ರಾಗಿಣಿ ದ್ವಿವೇದಿ ಸದ್ಯ `ಸರ್ಕಾರಿ ನ್ಯಾಯಬೆಲೆ ಅಂಗಡಿ` ಚಿತ್ರದಲ್ಲಿ ಅಭಿನಯಿಸುತ್ತಿರುವುದು ಅನೇಕರಿಗೆ ಗೊತ್ತಿರಬಹುದು. ಈ ಚಿತ್ರದಲ್ಲಿ ನಟಿ ರಾಗಿಣಿ ದ್ವಿವೇದಿ ಹಳ್ಳಿಯ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. `ಸರ್ಕಾರಿ ನ್ಯಾಯಬೆಲೆ ಅಂಗಡಿ`ಯ ಲೋಪ-ದೋಷಗಳನ್ನು ಎತ್ತಿ ಹಿಡಿಯುವ ಪಾತ್ರ ರಾಗಿಣಿ ಅವರದ್ದು.
ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ನಟಿ ರಾಗಿಣಿ ದ್ವಿವೇದಿ, ತಮ್ಮ ಮುಂಬರುವ ಸಿನಿಮಾ ಮತ್ತು ಪಾತ್ರಕ್ಕೆ ತಕ್ಕಂತೆ `ಸರ್ಕಾರಿ ನ್ಯಾಯಬೆಲೆ ಅಂಗಡಿ` ಗೆ ಅಡಿಯಿಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಪ್ರದೇಶದ `ಸರ್ಕಾರಿ ನ್ಯಾಯಬೆಲೆ ಅಂಗಡಿ` ಯಲ್ಲಿ ತಾವೇ ಖುದ್ದಾಗಿ ನಿಂತುಕೊಂಡು ಪಡಿತರ ಚೀಟಿದಾರರಿಗೆ ದಿನಸಿ ಸಾಮಾನುಗಳನ್ನು ವಿತರಿಸುವ ಮೂಲಕ ಪಡಿತರ ವಿತರಣೆ ವ್ಯವಸ್ಥೆಯನ್ನು ತಿಳಿದುಕೊಂಡರು. `ಸರ್ಕಾರಿ ನ್ಯಾಯಬೆಲೆ ಅಂಗಡಿ` ಯಲ್ಲಿ ಪಡಿತರ ಚೀಟಿದಾರರು ಮತ್ತು ವಿತರಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಕಣ್ಣಾರೆ ಕಂಡುಕೊಳ್ಳುವ ಪ್ರಯತ್ನ ಮಾಡಿದ್ದಾರೆ.
`ಸರ್ಕಾರಿ ನ್ಯಾಯಬೆಲೆ ಅಂಗಡಿ` ಚಿತ್ರತಂಡದ ಜೊತೆಗೆ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ನಟಿ ರಾಗಿಣಿ ದ್ವಿವೇದಿ ಇಂಥದ್ದೊಂದು ವಿಭಿನ್ನ ರೀತಿಯ ಕಾರ್ಯಕ್ರಮ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.